ಯಲಹಂಕ : ಯಲಹಂಕ ತಾಲೂಕು ಆಡಳಿತದ ವತಿಯಿಂದ ಶನಿವಾರ ಆಯೋಜಿಸಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ಅವರು ಧ್ವಜಾರೋಹಣ ನೆರವೇರಿಸಿ ಧ್ವಜವಂದನೆ ಸಲ್ಲಿಸಿದರು.

ನಂತರ ಮಾತನಾಡಿದ ಅವರು ಸ್ವಾತಂತ್ರ್ಯ ದಿನಾಚರಣೆ ಎಂಬುದು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ಸ್ಮರಿಸುವ ದಿನವಾಗಿದ್ದು, ಅವರು ದೇಶಕ್ಕಾಗಿ ತಮ್ಮ ಪ್ರಾಣತ್ಯಾಗ ಮಾಡಿ ಸ್ವಾತಂತ್ರ್ಯ ನೀಡದಿದ್ದರೆ ನಾವು ಇನ್ನೂ ಸಹ ಬ್ರಿಟಿಷರ ದಾಸ್ಯದ ಸಂಕೋಲೆಯಲ್ಲೇ ಇರಬೇಕಾಗಿತ್ತು. ನಮ್ಮ ಹಿರಿಯರು ತ್ಯಾಗ ಬಲಿದಾನ ಮಾಡಿ ನಮಗೆ ನೀಡಿರುವ ಸ್ವಾತಂತ್ರ್ಯವನ್ನು ನಾವು ಜತನದಿಂದ ಕಾಪಾಡಿಕೊಳ್ಳಬೇಕು ಎಂದರು.
ಯಲಹಂಕ ತಾಲೂಕು ಘೋಷಣೆ ಯಾದಾಗಿನಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಯಲಹಂಕ ತಾಲೂಕು ಆಡಳಿತದ ವತಿಯಿಂದ ಹೊಯ್ಸಳ ಮೈದಾನದಲ್ಲಿ ಆಯೋಜಿಸಿಕೊಂಡು ಬರಲಾಗುತ್ತಿದ್ದು, ವರ್ಷದಿಂದ ವರ್ಷಕ್ಕೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ವಿಜೃಂಭಣೆಯ ಪರಾಕಾಷ್ಟೆ ತಲುಪುತ್ತಿರುವುದು ಸಂತೋಷದ ಸಂಗತಿ. 80ನೇ ಸ್ವಾತಂತ್ರ್ಯ ದಿನೋತ್ಸವದ ಈ ಕಾರ್ಯಕ್ರಮದಲ್ಲಿ ಸಹಸ್ರಾರು ಸಂಖ್ಯೆಯ ನಾಗರಿಕರು, ಶಾಲಾ ಮಕ್ಕಳು, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಗಳು ಹಿಂದೆಂದಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಹರ್ಷದ ಸಂಗತಿ ಎಂದರು.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪೊಲೀಸ್ ಇಲಾಖೆ, ಶಾಲಾ ಮಕ್ಕಳು ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಗಳಿಂದ ಆಕರ್ಷಕ ಪಥಃ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು, ದೇಶಭಕ್ತಿ ಸಾರುವ ಗಾಯನ, ನೃತ್ಯ ಕಾರ್ಯಕ್ರಮಗಳು ಜರುಗಿದವು.

ಕಾರ್ಯಕ್ರಮದಲ್ಲಿ ಸಂಸದರಾದ ಕೆ.ಸುಧಾಕರ್, ಯಲಹಂಕ ತಾಲೂಕು ತಹಸೀಲ್ದಾರ್ ಸೈಯದ್ ಕಲೀಮ್ ಉಲ್ಲಾ, ಬೆಂಗಳೂರು ಉತ್ತರ ನಗರಪಾಲಿಕೆ ವಲಯ 2ರ ಜಂಟಿ ಆಯುಕ್ತರಾದ ಕೆ ಆರ್ ಪಲ್ಲವಿ, ಯಲಹಂಕ ತಾಲೂಕು ಪಂಚಾಯಿತಿ ಇಓ ಮಧು ಎಲ್, ಬೆಂಗಳೂರು ಉತ್ತರ ತಾಲೂಕು ಪಂಚಾಯಿತಿ ಇಓ ವಸಂತ್ ಕುಮಾರ್ ಎಚ್ ಡಿ, ಬಿಇಓ ಶೈಲಾ ಆರ್ ಎನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿದ್ದರು.
